ಎಂ. ಗೋಪಾಲಕೃಷ್ಣ ಅಡಿಗ

adiga

ಪ್ರಸಿದ್ಧ ನವ್ಯಕಾವ್ಯದ ಕವಿಗಳೂ, ವಿಮರ್ಶಕರೂ ಆಗಿದ್ದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರು ರಾಮಪ್ಪ ಮತ್ತು ಗೌರಮ್ಮನವರ ಪುತ್ರರಾಗಿ ೧೮-೨-೧೯೧೮ರಲ್ಲಿ ಜನಿಸಿದರು.

ಶಾಲಾ ಶಿಕ್ಷಣ ಬೈಂದೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಆಯಿತು. ೧೯೪೨ರಲ್ಲಿ ಬಿ.ಎ. ಆನರ್ಸ್ ಪದವಿಯನ್ನು ಗಳಿಸಿದರು. ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ ಮೇಲೆ ೧೯೪೭ರಲ್ಲಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿ ಎಂ.ಎ. ಪದವಿ ಗಳಿಸಿದರು. ೧೯೪೮ ರಿಂದ ೧೯೫೨ರವರೆಗೆ ಮೈಸೂರಿನ ಶಾರದಾವಿಲಾಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ೧೯೫೨ ರಿಂದ ೫೪ರವರೆಗೆ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ೧೯೬೪-೬೮ವರೆಗೆ ಸಾಗರದ ಎಲ್.ಬಿ. ಕಾಲೇಜಿನಲ್ಲಿ ಮತ್ತು ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿ ಇವರು ಕಾರ್ಯನಿರ್ವಹಿಸಿದರು. ಅನಂತರ ೧೯೭೧ರಲ್ಲಿ ನ್ಯಾಷನಲ್ ಬುಕ್ ಟ್ರಸ್ಟಿನ ನಿರ್ದೇಶಕರಾದರು. ಇದಾದ ನಂತರ ೧೯೭೧ರಲ್ಲಿ ಜನಸಂಘದ ಅಭ್ಯರ್ಥಿಯಾಗಿ ಸಂಸತ್ತಿನ ಚುನಾವಣೆಗೆ ಸ್ಪರ್ಧಿಸಿದ್ದರು. ಸಿಮ್ಲಾದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡೀಸ್‍ನಲ್ಲಿ ರಿಸರ್ಚ್ ಫೆಲೋ ಆಗಿ ಕೆಲಸಮಾಡಿದರು.

ಸಾಕ್ಷಿ ಎಂಬ ತ್ರೈಮಾಸಿಕವನ್ನು ಕೆಲಕಾಲ ನಡೆಸಿದ ಇವರು ಕನ್ನಡದಲ್ಲಿ ಶ್ರೇಷ್ಠ ಕವನಗಳನ್ನೂ ವಿಮರ್ಶಾಕೃತಿಗಳನ್ನೂ ಬರೆದಿದ್ದಾರೆ. ಇವರ ಸೇವೆಗೆ ಮೆಚ್ಚಿ ಹಲವಾರು ಪ್ರಶಸ್ತಿಗಳು ಬಂದಿವೆ. ೧೯೭೩ರ ರಾಜ್ಯ ಸರಕಾರ ‘ವರ್ಧಮಾನ’ ಕವನ ಸಂಕಲನಕ್ಕೆ ಪ್ರಶಸ್ತಿ, ೧೯೭೪ರಲ್ಲಿ ಕೇಂದ್ರ ಸರಕಾರದ ಪ್ರಶಸ್ತಿ, ೧೯೯೩ರಲ್ಲಿ ಕರ್ನಾಟಕ ಸರಕಾರ ಪಂಪ ಪ್ರಶಸ್ತಿ, ಮಧ್ಯಪ್ರದೇಶ ಸರಕಾರದ ಕಬೀರ್ ಸನ್ಮಾನ ಪ್ರಶಸ್ತಿ ಇವರಿಗೆ ಲಭಿಸಿತ್ತು. ೧೯೭೯ರಲ್ಲಿ ಧರ್ಮಸ್ಥಳದಲ್ಲಿ ನಡೆದ ೫೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ಇವರಿಗೆ ಪರಿಷತ್ತು ನೀಡಿತ್ತು.

ಅಡಿಗರು ರಚಿಸಿದ ಕೆಲವು ಮುಖ್ಯ ಕೃತಿಗಳು ಇವು: ಭಾವತರಂಗ, ಕಟ್ಟುವೆವು ನಾವು, ನಡೆದುಬಂದ ದಾರಿ, ಭೂಮಿಗೀತ, ಚಂಡಮದ್ದಲೆ, ವರ್ಧಮಾನ ಇತ್ಯಾದಿ ಕವನಸಂಕಲಗಳು. ಅನಾಥೆ, ಆಕಾಶದೀಪ (ಕಾದಂಬರಿಗಳು), ಮಣ್ಣಿನ ವಾಸನೆ, ವಿಚಾರಪಥ, ಕನ್ನಡದ ಅಭಿಮಾನ (ಗದ್ಯ ಲೇಖನಗಳು), ಹುಲ್ಲಿನ ದಳಗಳು, ಭೂಗರ್ಭಯಾತ್ರೆ, ಇತಿಹಾಸಚಿತ್ರ (ಅನುವಾದಗಳು).

ಗೋಪಾಲಕೃಷ್ಣ ಅಡಿಗರು ಬೆಂಗಳೂರಿನಲ್ಲಿ ೧೪-೧೧-೧೯೯೨ರಲ್ಲಿ ನಿಧನರಾದರು.

Tag: M. Gopalakrishna Adiga, Kabir Samman

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)